ಶುಕ್ರವಾರ, ಮಾರ್ಚ್ 15, 2013

ಕಲರ್‌ಫುಲ್ “ಮೈನಾ”


   
       ಉಸೇನ್ ಬೋಲ್ಟ್ ನಂತೆ ನಾಯಕ ಓಡುತ್ತಾನೆ. ಇವನ ಓಟ ಓಲಂಪಿಕ್ಸ್ ನಲ್ಲಿ ಗೆಲ್ಲಲ್ಲಿಕ್ಕೆ ಅಲ್ಲ. ಅವನ ಪ್ರೇಯಸಿಯನ್ನು ಸೇರಲಿಕ್ಕೆ. ಆದರೂ ಅವನನ್ನು ಹಿಡಿಯಲು ಸಾಧ್ಯವೇ ಇಲ್ಲದಂತೆ ಓಡುವ ಪೋಲೀಸ್ ಇನ್ಸ್‍ಪೆಕ್ಟರ್ ಅವನನ್ನು ಬೆಂಬಿಡದೆ ಹಿಂಬಾಲಿಸುತ್ತಾನೆ. ಸಮುದ್ರದ ದಂಡೆಯಲ್ಲಿನ ಚೇಸಿಂಗ್ ಸಮುದ್ರದೊಳಕ್ಕೆ ಶಿಫ್ಟ್ ಆಗುತ್ತದೆ. ನಾಯಕ ಬೋಟ್‌ನಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ವಿಫಲನಾಗಿ ಸಮುದ್ರದೊಳಕ್ಕೆ ಬೀಳುತ್ತಾನೆ. ಅವನ ಹಿಂದೆಯೇ ಬೋಟ್‌ನಿಂದ ಸಮುದ್ರಕ್ಕೆ ಚಿಮ್ಮುವ ಇನ್ಸ್‍ಪೆಕ್ಟರ್ ನ ಪ್ರಯತ್ನ ಗ್ಯಾರಂಟಿ ವಿಫಲವಾಗುತ್ತದೆ ಎನ್ನುವಷ್ಟರಲ್ಲಿ ಒಬ್ಬನೇ ಎದ್ದ ಇನ್ಸ್‍ಪೆಕ್ಟರ್ ಕೈಯಲ್ಲಿ ಬೇಡಿಯಿಂದ ಬಂಧಿತನಾದ ಸೋತ ನಾಯಕನಿರುತ್ತಾನೆ. ಕಾಣದ ಕಡಲಿಗೆ... ಹಂಬಲಿಸಿದೇ ಮನ... ಕಾಣದ ಕಡಲಿಗೆ... ಹಂಬಲಿಸಿದೇ ಮನ... ಮನ... ಕಾಣಬಲ್ಲನೇ ಒಂದು ದಿನ, ಕಡಲನ್ನು ಕೂಡಬಲ್ಲನೇ ಒಂದು ದಿನ, ಕಾಣಬಲ್ಲನೇ ಒಂದು ದಿನ, ಕಡಲನ್ನು ಕೂಡಬಲ್ಲನೇ ಒಂದು ದಿನ ರಾಷ್ರಕವಿ ಜಿ.ಎಸ್. ಶಿವರುದ್ರಪ್ಪನವರ ಗೀತೆಯ ಮೊದಲ ಸಾಲುಗಳು ಸಿರಿಕಂಠದ ಸಿ.ಅಶ್ವಥ್ ಧ್ವನಿಯಲ್ಲಿ ನಿಮ್ಮ ಮನೆಯಲ್ಲಿಯೇ ಮೊಳಗಿದಂತೆ ಮೊಳಗತೊಡಗುತ್ತವೆ. ಪ್ರೇಕ್ಷಕರೆಲ್ಲಾ beginning ಚೆನ್ನಾಗಿದೆ ಎಂದು ಚಿತ್ರದಲ್ಲಿ ತನ್ಮಯರಾಗುತ್ತಾರೆ.
...
          ನಾಯಕಿ ಕಲರ್‌ಫುಲ್... ಎಂದು ಕೂಗುತ್ತಾಳೆ. ಲವ್ ಯು... ಎನ್ನುತ್ತಾಳೆ. ಅವಳು ಈ ಮಾತನ್ನು ಹೇಳುವುದು ಅವಳಷ್ಟೇ ಸುಂದರವಾದ ದೂದ್‌ಸಾಗರ್ ಜಲಪಾತಕ್ಕೆ. ನಾಯಕ ಬೆರಗಿನಿಂದ ಅವಳನ್ನೇ ನೋಡಿದಾಗ ಕಲರ್ ಫುಲ್ ಮತ್ತು ಲವ್ ಯು ಎರಡಕ್ಕೂ ಒಂದೇ ಉಚ್ಚಾರ ಎನ್ನುತ್ತಾಳೆ. ಅವಳ ತುಟಿಗಳನ್ನು ಚಲಿಸಿ ತೋರಿಸುತ್ತಾಳೆ. ನಾಯಕನೂ ಅವಳಂತೆಯೇ ಕಲರ್ ಫುಲ್, ಲವ್ ಯು ಎಂದು ರೋಮಾಂಚನಗೊಳ್ಳುತ್ತಾನೆ. ರೈಲಿನ ದಿನನಿತ್ಯದ ಪ್ರಯಾಣದಲ್ಲಿ ಹೀಗೆ ಸಾಗುವ ಅವರ ಮಾತುಕತೆ ಮುಂದುವರೆದು ನಾಯಕಿ ಅವನನ್ನು ಪ್ರೀತಿಸಲು ತೊಡಗುತ್ತಾಳೆ. ಒಮ್ಮೆ ಅವಳ ಬ್ಯಾಗನ್ನು ಕಳ್ಳನೊಬ್ಬ ಅಪಹರಿಸಿದಾಗ ಅಲ್ಲಿಯವೆರಗೂ ಕಾಲಿಲ್ಲದ ಭಿಕ್ಷುಕನಂತೆ ನಟಿಸುವ ನಾಯಕ ಚಂಗನೆ ರೈಲಿನಿಂದ ಜಿಗಿದು ಓಡಿ ಕಳ್ಳನಿಗೆ ಡಿಶುಂ ಡಿಶುಂ ಮಾಡಿ ಅವಳ ಬ್ಯಾಗನ್ನು ಮರಳಿ ತರುತ್ತಾನೆ. ಅವನು ರೈಲಿನಿಂದ ಚಂಗನೆ ಜಿಗಿಯುವವರೆಗೂ ಅವನಿಗೆ ನಿಜವಾಗಲೂ ಕಾಲಿಲ್ಲ ಎಂದು ನಂಬಿದ್ದ ನಾಯಕಿಗೆ ಬರಸಿಡಿಲು ಎರಗಿದಂತಾಗುತ್ತದೆ. ...   ಏಕೆಂದರೆ ಅವಳಿಗೂ ಕಾಲಿರುವುದಿಲ್ಲ! ತೆವಳಿಕೊಂಡೆ ರೈಲಿನಿಂದ ಇಳಿಯುವ ಆಕೆ ಫ್ಲಾಟ್‌ಫಾರ್ಮಿನ ಮೇಲೆ ಕುಸಿದು ಕೂಡುತ್ತಾಳೆ. ... ನೀನು ಸುಳ್ಳುಗಾರ ಅನ್ನುತ್ತಾಳೆ ಅವಳು. ಅವನು ಮೌನದಿಂದ ಅವಳನ್ನೇ ನೋಡುತ್ತಾನೆ. II Hate Youe U ಅನ್ನುತ್ತಾಳೆ. ನೀನು ಈಗಲೂ ನನ್ನನ್ನು ಪ್ರೀತಿಸುತ್ತೀಯಾ? ಎನ್ನುತ್ತಾಳೆ. ಅವನು ಮೌನ ಮುರಿದು, ನಾನು ನಿನ್ನ ಬಗ್ಗೆ ಎಲ್ಲಾ ತಿಳಿದೇ ನಿನ್ನನ್ನು ಪ್ರೀತಿಸುತ್ತೇನೆ ಎನ್ನುತ್ತಾನೆ ಅವನು. ... ಅವರಿಬ್ಬರೂ ಮಂಡಿಯೂರಿಯೇ ಆಲಂಗಿಸುತ್ತಾರೆ. ಅವಳನ್ನು ಅವನು ಅನಾಮತ್ತು ಎತ್ತಿಕೊಂಡು ತಿರುಗಿಸುತ್ತಾನೆ. ಅವರ ಆನಂದಕ್ಕೆ, ಪ್ರೀತಿಯ ಪರಮೋತ್ಕರ್ಷಕ್ಕೆ ಸಾಟಿಯೇ ಇಲ್ಲ. ಇವರ ಆನಂದಕ್ಕೆ ಬಾನು ಭೂಮಿ ಒಂದಾದಂತೆ ನೋಡುಗರ ಎದೆಯಲ್ಲಿ ಮಿಂಚಿನ ಸಂಚಾರವಾಗುತ್ತದೆ. ಮೈಮರೆತ ಮನಸ್ಸುಗಳು ವಾವ್!, ಪ್ರೀತಿ ಎಂದರೆ ಹೀಗಿರಬೇಕು ಎಂದು ಮನದಲ್ಲಿ ಅಂದುಕೊಂಡು ಆನಂದದಲ್ಲಿ ಮುಳುಗುತ್ತಾರೆ. ಕಡೆಗೂ ಒಂದು ಉತ್ತಮ ಕಥೆಯುಳ್ಳ ಕನ್ನಡ ಸಿನಿಮಾಗೆ ಬಂದೆವು ಅಂದುಕೊಳ್ಳತೊಡಗುತ್ತೇವೆ. ಅದು ಸಿನಿಮಾದ Middle. I mean Interval.
...
          ನಾಯಕನು ನಿರಪರಾಧಿ ಎಂಬುದು ಇನ್ಸ್‍ಪೆಕ್ಟರ್ ಗೆ ಗೊತ್ತಾಗಿದೆ. ಅವನು ಮಾಡಿರುವ ಅಪರಾಧವೂ ಪೂರ್ವ ನಿರ್ಧರಿತವಲ್ಲ ಎಂದು ಅರಿವಾಗಿದೆ. ಆದ್ದರಿಂದ ಬೇರೆಯಾದ ನಾಯಕ ನಾಯಕಿಯನ್ನು ಏನಾದರೂ ಮಾಡಿ ಸೇರಿಸಬೇಕೆಂಬ ಹಠ. ಆದರೆ ಅವನು ಅಸಹಾಯಕ. ಅಷ್ಟರಲ್ಲಿ ನಾಯಕಿಯನ್ನು  ಅನಾಥಶ್ರಮಕ್ಕೆ ಸೇರಿಸುವ ವಿಚಾರ ನಾಯಕನಿಗೆ ತಿಳಿಯುತ್ತದೆ. ಅವನು ತಪ್ಪಿಸಿಕೊಂಡು ಬಿಡುತ್ತಾನೆ. ಮತ್ತು ಇನ್ಸ್‍ಪೆಕ್ಟರ್ ಗೆ ಇದು ತಲೆನೋವಾಗುತ್ತದೆ. ನಾನು ಏನಾದರೂ ಮಾಡುತ್ತಿದ್ದೆ, ಇವನು ಯಡವಟ್ಟು ಮಾಡಿಕೊಂಡ ಎಂದು ಪರಿತಪ್ಪಿಸುತ್ತಾನೆ. ಅದು Climax.

           ನಾಯಕ ತನ್ನ ಗೆಳೆಯನ ಸಹಾಯದಿಂದ ನಾಯಕಿಯನ್ನು ತನ್ನ ಊರಿಗೆ ಕರೆದುಕೊಂಡು ಹೋಗುವ ಹುನ್ನಾರದಲ್ಲಿದ್ದಾಗ ರೈಲ್ವೇಸ್ಟೇಷನ್‌ನಲ್ಲಿ ಬಿಗಿ ಫೊಲೀಸ್ ಕಾವಲಿನಲ್ಲಿ ನಾಯಕನ ಬರುವಿಕೆಗೆ ನಾಯಕಿ ಚಡಪಡಿಸುತ್ತಿರುತ್ತಾಳೆ. ಜೊತೆಗೆ ಫೋಲಿಸರ ಕಣ್ತಪ್ಪಿಸಿ ನಾಯಕನನ್ನು ಕೊಲ್ಲುವ ಸಂಚಿನ ಹೋಮ್ ಮಿನಿಸ್ಟರ್ ಕಡೆಯ ವಿಲನ್‌ಗಳು. ಈ ವಿಲನ್‌ಗಳನ್ನು ಹಿಂಬಾಲಿಸುವ ಮತ್ತಷ್ಟು ಫೋಲಿಸರು. ಇವರೆಲ್ಲರ  ನಡುವೆ ನಾಯಕಿ ಹುಲಿಯನ್ನು ಸೆರೆಯಿಡಿಯಲು ಬೇಟೆಗಾರರು ಕಟ್ಟಿ ಹಾಕಿದ ಕುರಿಯಂತೆ ತೋರುತ್ತಾಳೆ. ಆಗ ಮತ್ತೊಮ್ಮೆ ಕಾಣದ ಕಡಲಿಗೆ.. ಹಂಬಲಿಸಿದೇ ಮನ.. ಗೀತೆ ಮುಂದುವರೆಯುತ್ತದೆ ... ಜಟಿಲ ಕಾನನದ ಕುಟಿಲ ಪಥಗಳಲ್ಲಿ ಹರಿವ ತೊರೆಯು ನಾನು, ಎಂದಿಗಾದರೂ ಎಂದಿಗಾದರೂ ಎಂದಿಗಾದರೂ ಕಾಣದ ಕಡಲನ್ನು ಸೇರಬಲ್ಲೆಯೇನು? ಸೇರಬಹುದೆ ನಾನು? ಕಡಲ ನೀಲಿಯೊಳು ಕರಗಬಹುದೇ ನಾನು?
ಅಯ್ಯೋ! ಒಂದೊಳ್ಳೆ ಹಾಡು ಮುಗಿಯಿತು ಅನ್ನವಷ್ಟರಲ್ಲಿ ಸಿನಿಮಾವು ಮುಗಿಯುವ ಹಂತಕ್ಕೆ ಬಂದಿರುತ್ತದೆ. ನಾಯಕ ಬರುತ್ತಾನೆ. ನಾಯಕಿಯ ಖುಷಿಗೆ ಎಲ್ಲೆಯಿಲ್ಲ. ನಾಯಕನದು ಸಂತೃಪ್ತಿಯ ಭಾವ. ಅವಳನ್ನು ತನ್ನ ಕಣ್ಣುಗಳಲ್ಲಿ ತುಂಬಿಸಿಕೊಳ್ಳುವ ನಾಯಕನ ಎದೆಯ ಕಡೆ ಗುರಿಯಾಗಿಸಿದ್ದ ವಿಲನ್‌ನ ಬಂದೂಕನ್ನು ಫೋಲಿಸರು ಚಾಕಚಕ್ಯೆತೆಯಿಂದ ಮೊದಲೇ ಕಸಿದುಕೊಳ್ಳುತ್ತಾರೆ. ಸದ್ಯ ಸುಖಾಂತ್ಯವಾಯಿತಲ್ಲ ಎಂದು ಅರೆಂಜ್ ಮ್ಯಾರೇಜ್ ಆಗಿದ್ದವರು ಅಂದುಕೊಂಡು, ಲವ್ ಮ್ಯಾರೇಜ್ ಆಗಬೇಕೆಂದು ಕೊಂಡವರು ನಿಜವಾದ ಪ್ರೀತಿಗೆ ಎಂದೆಂದಿಗೂ ಜಯ ಕಟ್ಟಿಟ್ಟ ಟಿಫಿನ್ ಬಾಕ್ಸ್ ಎಂದು ಕೊಳ್ಳುವಷ್ಟರಲ್ಲಿ ಇನ್ಸ್‍ಪೆಕ್ಟರ್ ತನ್ನ ಫೋಲಿಸ್ ಸಿಬ್ಬಂದಿ ನಾಯಕನ ಎದೆಗೆ ಬಂದೂಕನ್ನು ಗುರಿಯಾಗಿಸಿರುವುದನ್ನು ನೋಡಿ, ಡೊಂಟ್ ಫೈರ್... ಎಂದು ಅರಚಿದರೂ, ಫೋಲಿಸರ ಬಂದೂಕುಗಳಿಗೆ ಡೊಂಟ್ ಕೇಳಿಸುವುದಿಲ್ಲ. ಫೈರ್ ಆಗಿಯೇ ಬಿಡುತ್ತದೆ. ಅಶ್ವತ್ಥಾಮೋ ಹತಾ ಗತಃ ಎಂಬ ಮಹಾಭಾರತದ ಸಾಲು ನಿಮ್ಮ ಕಿವಿಯಲ್ಲಿ ರಿಂಗಣಿಸುತ್ತದೆ. ಅಲ್ಲಿಗೆ ಸಿನಿಮಾ The End.
          ...
          ಕನ್ನಡದ ಸಹೃದಯ ಪ್ರೇಕ್ಷಕರಿಗೆ ಅಂತ್ಯದಲ್ಲಿ ಫೈರ್ ಆಗುವ ಮುನ್ನವೇ ಸಿನಿಮಾ ಮುಗಿದಿರುತ್ತದೆ. ಫೈರ್ ಆದ ನಂತರ ಅಲ್ಲಿಯವರೆಗೂ ನಿಜವಾದ ನಾಯಕನಾಗಿದ್ದ ನಿರ್ದೇಶಕ ಒಂದೇ ಒಂದು ಕ್ಷಣದಲ್ಲಿ ವಿಲನ್ ಆಗಿ ಗೋಚರಿಸತೊಡಗುತ್ತಾನೆ. ಇಬ್ಬರನ್ನು ಕಡೆಗೆ ಅನವಶ್ಯಕವಾಗಿ ಸಾಯಿಸಬಾರದಿತ್ತು ಎಂದು ಗೊಣಗುತ್ತಾ ಪ್ರೇಕ್ಷಕ ಮಹಾಪ್ರಭು ನಿರ್ದೇಶಕನಿಗೆ ತಲೆಕೆಟ್ಟಿದೆ ಎಂದುಕೊಳ್ಳುತ್ತಾ ಥಿಯೇಟರ್‌ನಿಂದ ಹೊರಬೀಳುತ್ತಾನೆ. ಮನೆಗೆ ಬಂದು ಟಿವಿಯಲ್ಲಿ ನಿರ್ದೇಶಕ ಅದೇಕೆ ಹೀಗೆ ಮಾಡಿದ ಎಂದು ಹುಡುಕುತ್ತಾನೆ. ಯಾವುದೋ ಒಂದು ಛಾನೆಲ್ಲಿನಲ್ಲಿ ನಿರ್ದೇಶಕರು ನಗುತ್ತಾ ಮೈನಾ ಸೆಂಕೆಂಡ್ ಪಾರ್ಟ್ ಮಾಡ್ತೀವಿ ಎಂದು ಹಲ್ಲುಕಿರಿಯುತ್ತಾರೆ.

          ಇದು ಇತ್ತೀಚೆಗೆ ಬಿಡುಗಡೆಕೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ ಮೈನಾ ಚಿತ್ರ ಕುರಿತು ನನ್ನ ಅನಿಸಿಕೆ. ಚಿತ್ರಕ್ಕೆ ಕರ್ನಾಟಕ ಫೋಲಿಸ್‌ನಲ್ಲಿ ಟೈಗರ್ ಎಂದೇ ಖ್ಯಾತರಾದ ಎಸಿಪಿ ಅಶೋಕ್ ಕುಮಾರ್‌ರವರು ನಿರ್ದೇಶಕ ನಾಗಶೇಖರ್‌ರವರಲ್ಲಿ ಹಂಚಿಕೊಂಡ ನೈಜ ಕಥೆಯ ಬೆಂಬಲವಿದೆ. ಅದನ್ನು ಸಿನಿಮಾಕ್ಕೆ ಅಳವಡಿಸುವಲ್ಲಿ ನಿರ್ದೇಶಕರು ೯೯% ರಷ್ಟು ಯಶಸ್ವಿಯಾಗಿದ್ದಾರೆ (ಅನಗತ್ಯವಾಗಿ ದುರಂತ ಅಂತ್ಯ ಮಾಡಿ ಫುಲ್ ಮಾರ್ಕ್ಸ್ ಕಳೆದುಕೊಂಡಿದ್ದಾರೆ). ಚಿತ್ರಕಥೆ ಪ್ರೇಕ್ಷಕನನ್ನು ಹಿಡಿದಿಟ್ಟುಕೊಳ್ಳಲು ಸಫಲವಾಗಿದೆ. ರೋಮ್ಯಾಂಟಿಕ್ ಚಿತ್ರಕ್ಕೆ ಸಸ್ಪೆನ್ಸ್ ಥ್ರಿಲರ್‌ನ ಟಚ್ಚಿದೆ. ಅತಿಯೆನಿಸದ ಸಂಭಾಷಣೆಯಿದೆ. ಆ ದಿನಗಳು ನಂತರ ಚೇತನ್ ಮತ್ತೊಮ್ಮೆ ತಮ್ಮ ಪ್ರತಿಭೆ tOತೋರಿದ್ದಾರೆ. ಯುವ ಮನಸ್ಸುಗಳಿಗೆ ಕಚಗುಳಿಯಿಡುವ ಧೂದ್ ಸಾಗರ್ ಜಲಪಾತಕ್ಕೆ ಸರಿಸಮನಾದ ನಾಯಕಿ ನಿತ್ಯಾ ಮೆನನ್ ಇದ್ದಾಳೆ. ಹಸಿರು ಬಿಳುಪಿನ ಹಿನ್ನೆಲೆಯಲ್ಲಿ ಚಿತ್ರವನ್ನು ಸೆರೆಹಿಡಿದು ನಿಮ್ಮ ಮನ-ಮನೆಯ ಚಿತ್ರಪಟಗಳನ್ನಾಗಿಸುವ ಸತ್ಯಹೆಗಡೆ ಕ್ಯಾಮೆರವಿದೆ. ಹಿತವಾದ ಸಾಧುಕೋಕಿಲರವರ ಹಿನ್ನಲೆ ಸಂಗೀತವಿದೆ. ಜೆಸ್ಸಿಗಿಫ್ಟ್ ಸಂಗೀತದಲ್ಲಿ ಗುನುಗುವ ಹಾಡುಗಳಿವೆ. ತಮ್ಮ ನಿಲುವಲ್ಲೇ ನಗಿಸುವ ಸಾಧುಕೋಕಿಲ, ತಬಲಾ ನಾಣಿ, ಬುಲೆಟ್ ಪ್ರಕಾಶ್ ಇದ್ದಾರೆ. ಎಸಿಪಿಯಾಗಿ ತಮಿಳಿನ ಶರತ್ ಕುಮಾರ್ ಗಮನ ಸೆಳೆದರೆ, ವಿಲನ್‌ಗಳು ಚಿತ್ರಕ್ಕೆ ಅಗತ್ಯವಿದ್ದ ಕಡೆ ಮಾತ್ರ ಬಂದು ಹೋಗುವುದು ಸಹ್ಯವಾಗಿದೆ. ಪೋಷಕ ಪಾತ್ರವರ್ಗದಲ್ಲಿ ಬಂದುಹೋಗುವ ಹೆಸರಾಂತರ ಪಡೆಯೇ ಇದೆ. ಇವೆಲ್ಲದರ ಜೊತೆಗೆ ಕಡೆಗೆ ಅನಗತ್ಯವಾದರೂ ಸುಮನ್ ರಂಗನಾಥಳ ಬಳುಕುವ ಸೊಂಟವಿದೆ. ಆ ಐಟಂ ಹಾಡಿನವರೆಗೂ ಫೋಲಿಸ್ ಅಧಿಕಾರಿಯಾಗಿ ಗಮನ ಸೆಳೆಯುವ ಸುಮನ್ ಈ ಹಾಡಿನಲ್ಲಿ ತಮ್ಮ ಸೊಂಟ ಬಳುಕಿಸುತ್ತಾರೆ. ಪ್ರೇಮದ ಪೂಜಾರಿ ಎನ್ನುವ ರಿಮಿಕ್ಸ್ ಹಾಡಿಗೆ ಆನಂದಿಸುವ ಅನೇಕ ಹಿರಿಯ ನಟರ ಪಡೆಯಿದೆ.

          ಅರಮನೆ, ಸಂಜು ವೆಡ್ಸ್ ಗೀತಾ ಎಂಬ ದುರಂತ ಅಂತ್ಯವಾಗುವ ಸಿನಿಮಾಗಳ ಗುಂಗಿನಿಂದ ಇನ್ನೂ ಹೊರಬಂದಿರದಂತೆ ಕಾಣುವ ನಿರ್ದೇಶಕರು ಈ ಸಿನಿಮಾದಲ್ಲೂ ಅನಗತ್ಯವಾಗಿ ನಾಯಕ ನಾಯಕಿಯರಿಗೆ ಶೂಟ್ ಮಾಡಿಸುವುದರ ಮೂಲಕ ತಮ್ಮ ದುರಂತ ಸರಣಿಯನ್ನು ಮುಂದುವರೆಸಿದ್ದಾರೆ. ಆ ಶೂಟ್ ಔಟಿನ ಕಡೆಯ ಸೀನಿಗೂ ಮುಂಚೆ ನೀವು ಸಿನಿಮಾ ಮಂದಿರದಿಂದ ಹೊರಬಿದ್ದರೆ ನಿಮ್ಮ ಮನದಲ್ಲಿ ಈ ವರ್ಷದ ಒಂದು ಉತ್ತಮ ಚಿತ್ರ ದಾಖಲಾಗುತ್ತದೆ. ಕನ್ನಡ ಚಿತ್ರಪ್ರೇಮಿಗಳೇ, ಒಂದು ಅಪರೂಪದ ಪ್ರೀತಿಯ ನೈಜಕಥೆ ಸಿನಿಮಾವಾಗಿ ಮೂಡಿದೆ. ಮರೆಯದಿರಿ, ಮರೆತು ನಿರಾಶರಾಗದಿರಿ.

***





ಇದು ಭಾರತದ “ಅಮೃತ ಕಾಲ”ವೇ!?

  ʼಅವನಿʼ ಪುಸ್ತಕದ ಮೂಲಕ ಓದುಗರಿಗೆ ಪರಿಚಿತರಾಗಿದ್ದ ರಾಹುಲ್‌ ಹಜಾರೆ ಅವರು ಇದೀಗ “ಅಮೃತ ಕಾಲ” ಎಂಬ ಹೊಸ ಪುಸ್ತಕವನ್ನು ಪ್ರಕಟಿಸಿದ್ದಾರೆ. ʼಭಾರತ ಬದಲಾಗಿದೆ! ಯಾರದ್ದ...