ಶುಕ್ರವಾರ, ನವೆಂಬರ್ 15, 2019

ಕನ್ನಡದ ಮೇಲಿನ ಅನನ್ಯ ಪ್ರೀತಿಯ ಜೊತೆಗೆ


(ವಿಶೇಷ ಸೂಚನೆ: ಈ ಪೋಸ್ಟನ್ನು ಪೂರ್ತಿ ಓದಿ, ನಿಮ್ಮ ಅನಿಸಿಕೆ ಕಾಮೆಂಟಿಸಿ. ಇದು ನಿಮಗೆ ಪಾಠವಾದರೂ ಆಗಬಹುದು! ಯಾರಿಗೊತ್ತು?)

ಕನ್ನಡದ ಮೇಲಿನ ಅನನ್ಯ ಪ್ರೀತಿಯ ಜೊತೆಗೆ ನಾನು ಓದಿದ್ದು ಸಂಸ್ಕೃತ ಸಾಹಿತ್ಯ ಮತ್ತು ಇಂಗ್ಲೀಷ್ ಸಾಹಿತ್ಯ. ಪದವಿಯವರೆಗೆ ಸಂಸ್ಕೃತವನ್ನು ಮೊದಲ ಭಾಷೆಯಾಗಿ ಕಲಿತವನಿಗೆ ಅದರ ಸಾಹಿತ್ಯ ಇವತ್ತಿಗೂ ಕಾಡುತ್ತಿದೆ. ಆ ನಂತರ ಸಾಹಿತ್ಯದ ಮೇಲಿನ ಪ್ರೀತಿಯಿಂದ ಕನ್ನಡ ಸಾಹಿತ್ಯವನ್ನು ಹಾಗೇ ಓದಿಕೊಳ್ಳಬಹುದು ಎಂದು ಭಾವಿಸಿ ಇಂಗ್ಲೀಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಇದರಿಂದ ಕೆಲಸವೂ ಸಿಗಬಹುದು ಎಂಬ ಪುಟ್ಟ ಆಸೆಯೂ ಇತ್ತು. ಆದರೆ, ಆಗಾಗ ಕನ್ನಡ ಸಾಹಿತ್ಯವನ್ನು ಓದುವುದನ್ನು ಬಿಡಲಿಲ್ಲ. ಬರೆಯಲು ಶುರುಮಾಡಿದ ಮೇಲೆ ಕತೆಗಳನ್ನು ಅರಿಯಲು ಬಹಳಷ್ಟು ಕತೆಗಳನ್ನು ಓದಿದೆ. ಆದರೂ ಬರೆಯಲು ಸಾಕಷ್ಟು ಕಷ್ಟವಾಗುತ್ತಿತ್ತು. ಆಗ ನಾನು ಕಂಡುಕೊಂಡ ಉಪಾಯವೇನೆಂದರೆ ಇಂಗ್ಲೀಷ್ ಕತೆಗಳನ್ನು ಕನ್ನಡಕ್ಕೆ ಅನುವಾದಿಸುವುದು. ಇದುವರೆವಿಗೂ ಕೆಲವು ಕತೆಗಳನ್ನು ಅನುವಾದಿಸಿ ಅವು ಪ್ರಕಟಗೊಂಡಿವೆ. ಮೊತ್ತ ಮೊದಲ ಅನುವಾದದ ಕತೆ ಪ್ರಕಟವಾದದ್ದು ಉದಯವಾಣಿಯಲ್ಲಿ. ಈ ವಿಷಯ ನನಗೆ ಮೊದಲು ಗೊತ್ತಾದ್ದದ್ದು ಮೂರು ತಿಂಗಳ ನಂತರ! ಅದನ್ನು ಮೊದಲು ನನಗೆ ತಿಳಿಸಿದ್ದು ಉದಯ್ ಇಟಗಿ ಸರ್. ಅವರು ಅಂದು ಮಧ್ಯರಾತ್ರಿ (ಆಗ ಫೇಸ್ ಬುಕ್ ಹೊಸದು) ಫೇಸ್ ಬುಕ್ ನೋಡುತ್ತಿದ್ದಾಗ ಚಾಟ್ ನಲ್ಲಿ ವಿಷಯ ತಿಳಿಸಿದರು. ಆಗ ನನಗಾದ ಖುಷಿ ಅಷ್ಟಿಷ್ಟಲ್ಲ.
ಆನಂತರ ನಾನೇ ಒಂದಷ್ಟು ಸ್ವಂತ ಕತೆಗಳನ್ನು ಬರೆದೆ, 'ಉಘೇ ಉಘೇ' ಸಂಕಲನವನ್ನೂ ಪ್ರಕಟಿಸಿದೆ. ಕೆಲವರ ಪ್ರೋತ್ಸಾಹವೂ ಸಿಕ್ಕಿತು. ಈ ಕುರಿತು ತದನಂತರ ಬರೆಯುವೆ. ಆನಂತರ ಅದಾಗಲೇ ಆತ್ಮೀಯರಾಗಿದ್ದ ಶಿವು ಕೆ. ಅವರ 'ವೆಂಡರ್ ಕಣ್ಣು' ಪ್ರಬಂಧಗಳನ್ನು ಇಂಗ್ಲೀಷಿಗೆ ಅನುವಾದಿಸಿ ಅದನ್ನು 'Boys Of The Dawn' ಎಂದು ಸಂಕಲಿಸಿ ಪ್ರಕಟಿಸಿದೆ. ಈ ಪುಸ್ತಕವು ನಮ್ಮ ವಲಯದಲ್ಲಿ ಹಲವರ ಮೆಚ್ಚುಗೆಗೆ ಪ್ರಾಪ್ತವಾಯಿತು.
ಆದರೆ, ಇರಲಿ ನಿಮ್ಮಲ್ಲಿ ಹೇಳಿಯೇ ಬಿಡುವೆ: ಈ 'ಸಾಹಿತ್ಯ-ಪ್ರಶಸ್ತಿ-ರಾಜಕಾರಣ' ನನ್ನಲ್ಲಿದ್ದ ಹುಮ್ಮಸ್ಸನ್ನು ನುಂಗಿ ನೀರು ಕುಡಿದು ಬಿಟ್ಟಿತು. ಅದ್ಯಾಕೋ ಗೊತ್ತಿಲ್ಲ ಈ ಎರಡೂ ಪುಸ್ತಕಗಳಿಗೆ ಬರಬೇಕಿದ್ದ ಪ್ರಶಸ್ತಿ ಇನ್ನೇನು ಬಂತು ಅನ್ನುವಾಗಲೇ ಬರಲಿಲ್ಲ. ಆನಂತರ ದಿನೇ ದಿನೇ ನನ್ನ ಆಸಕ್ತಿ (ಯಾಕೆಂದರೆ ಪ್ರಶಸ್ತಿ, ಬಹುಮಾನಗಳನ್ನು ನಾನು ಕೆಟಲಿಸ್ಟ್ ಅನ್ನುತ್ತೇನೆ) ಸಹಜವಾಗಿ ಕುಗ್ಗಿತು. ಇತ್ತೀಚೆಗೆ ಕಾರಣಗಳೂ ತಿಳಿದವು. ಹೋಗಲಿಬಿಡಿ ಎನ್ನಲು ಕನ್ನಡದಲ್ಲೇನು ಸಾವಿರಾರು ಪ್ರತಿಗಳು ಪುಸ್ತಕಗಳು ಮಾರಾಟವಾಗುವುದಿಲ್ಲ. ಪ್ರಶಸ್ತಿ, ಪುರಸ್ಕಾರಗಳು ದೊರೆತರೆ ಒಂದೈದು ಪ್ರತಿಗಳು ಹೆಚ್ಚು ಹೋಗಬಹುದು ಅಷ್ಟೆ. ಆದರೆ, ನಗದು ಬಹುಮಾನ ದೊರೆತರೆ ಆ ಹಣದಿಂದ ಮತ್ತೊಂದು ಪುಸ್ತಕವನ್ನು ಪ್ರಕಟಿಸಬಹುದು ಎಂಬುದು ನನ್ನ ಜಿಜ್ಞಾಸೆಯಷ್ಟೆ.
ಒಟ್ಟಿನಲ್ಲಿ ಖುಷಿಗಾಗಿ ಬರವಣಿಗೆ ಆರಂಭಿಸಿದವನು ಒಬ್ಬ ಸಾಹಿತಿಗೆ ಇರಬೇಕಾದ ಸಾಮಾಜಿಕ ಜವಾಬ್ದಾರಿಯ ಬಗ್ಗೆಯೂ ಬಹಳ ಬೇಗ ಅರಿತಿದ್ದೇನೆ. ಆ ನಿಟ್ಟಿನಲ್ಲಿ ನಾನೇನೇ ಬರೆದರು 'ಸ್ನೇಹ-ಪ್ರೀತಿ-ಜೀವನ' ವಸ್ತು ಬಹಳವಾಗಿ ಇರುತ್ತದೆ. ನನ್ನ ಪುಸ್ತಕಗಳಲ್ಲಿ ನನ್ನ ಬಯೋಡೇಟಾ ಪುಟದಲ್ಲಿ 'ವೀರಶೈವ ಬ್ಯಾಂಕ್ ಉದ್ಯೋಗಿ' ಎಂಬುದೇ ನನ್ನ ಪುಸ್ತಕಗಳಿಗೆ ಪ್ರಶಸ್ತಿ ಬಾರದಿರಲು ಕಾರಣವೆಂದು ತಿಳಿದಾಗ ಮಾತ್ರ ನಗಬೇಕೋ, ಅಳಬೇಕೋ ಎಂದು ಬಹಳ ನೊಂದಿದ್ದೇನೆ. ನನಗೆ ಬುದ್ಧಿ ಬಂತು ಎಂದ ಕ್ಷಣದಿಂದ ನಾನು 'ವಿಶ್ವ ಮಾನವ!'. ಇವತ್ತಿಗೂ ಹಾಗೇ ಬದುಕುತ್ತಿದ್ದೇನೆ. ಮುಂದೆಯೂ... ಇಷ್ಟು ವರ್ಷಗಳಲ್ಲಿ ಜಗತ್ತು ಬಹಳ ಅರ್ಥವಾಗಿಬಿಟ್ಟಿದೆ. ಒಂದಾನೊಂದು ಕಾಲದಲ್ಲಿ ಬಹಳ ಗಂಭೀರವಾಗಿರಬೇಕೆಂದುಕೊಂಡವನು ಅದರಲ್ಲಿ ಅರ್ಥವೂ ಇಲ್ಲ, ಜೀವನದ ಸಾರವೂ ಇಲ್ಲ ಎಂದು ನಾನು ನಾನಾಗೇ ಇದ್ದುಬಿಟ್ಟಿದ್ದೇನೆ. ಇಷ್ಟೆಲ್ಲಾ ಹೇಳಲು ಮೂಲ ಕಾರಣ ಮನಸ್ಸಿನ ಮೂಲೆಯಲ್ಲಿರುವ ಯಾವುದೋ ನೋವಿರಬಹುದು. ಅದು ಗೊತ್ತಿಲ್ಲ. ಫೇಸ್ ಬುಕ್ಕಿನಲ್ಲಿ ಇಷ್ಟೆಲ್ಲಾ ಇದೇ ಮೊದಲ ಬಾರಿಗೆ ನಾನು ಬರೆಯುತ್ತಿರುವುದು. ಮೂಲತಃ ಬ್ಲಾಗರ್ ಆಗಿದ್ದ ನನಗೆ ಇಷ್ಟು ಬರೆಯಲು ಕಷ್ಟವೇನು ಇರದು. ಇನ್ಮುಂದೆ ಬರೆಯಲೇ ಬೇಕಿದೆ...

ನಾನು ಕನ್ನಡದಿಂದ ಇಂಗ್ಲೀಷಿಗೆ ಅನುವಾದಿಸಿದ ಮೊದಲ ಪುಸ್ತಕ ಕೊಂಡು ಓದಲು...
https://imojo.in/2mm893c

ಭಾನುವಾರ, ಡಿಸೆಂಬರ್ 20, 2015

ನವೀನ್ ಮಧುಗಿರಿಯವರ ‘ನವಿಗವನ’ : ಆಯುವ ಕವಿ ನವೀನ್.


ರಸ್ತೆ ಬದಿಯಲ್ಲಿ ಹಾಡಿ
ಅನ್ನ ಉಣ್ಣುವ
ಟೋನಿ
ಪ್ರತೀದಿನ ತನ್ನ ಕರುಳು
ಹಿಂಡುವಷ್ಟು ಬಾರಿ
ಗಿಟಾರಿನ
ತಂತಿ ಮೀಟುವನು
        *
ರಸ್ತೆ ಬದಿಯಲ್ಲಿ
ತರಕಾರಿ ಮಾರಲು
ಬಂದವನು
ತನ್ನಸಿವ
ತಕ್ಕಡಿಯಲ್ಲಿ ತೂಗಿದ
        *
ತುಂಬಾ ಹೊತ್ತಿದ್ದರೆ
ವಾಸನೆ ಬರುವುದೆಂದು
ಅತ್ತರನ್ನ ಬಳಿದರು
ಬದುಕಿಡೀ
ಮೋರಿ ಬಳಿದೆ ಬದುಕಿದವನು
ಶವವಾಗಿ ಮಲಗಿದ್ದ
        *
ಬಣ್ಣ ಮಾಸಿದ
ಗೋಡೆಯ ತುಂಬಾ
ಬಡತನದ ಚಿತ್ರ
        *
ಅಕ್ಷರದಿಂದ ದೇಶವನ್ನು
ಬದಲಿಸಬಹುದು!
ನಿಜಾ,
ಆದರೆ ಹಸಿವಿಗೆ
ಅನ್ನವೇ ಬೇಕು.
        *
ರೈತ
ದೇಶದ ಬೆನ್ನೆಲುಬು
ಬಡತನ
ರೈತನ ನೆರಳು
        *
ನಮ್ಮ ಮನೆಗೆ
ಬಾಗಿಲಿಡುತ್ತೇವೆ
ಹಕ್ಕಿಗಳ ಮನೆ ಕಿತ್ತು
        *
ಊರ ತುಂಬಾ
ಬೆದೆಗೆ ಬಂದ ನಾಯಿಗಳೆ,
ಉಚ್ಚೋ... ಎಂದೋಡಿಸಲು
ಎಳೆಯ ಹೆಣ್ಣು ಕೂಸಿನ್ನು
ಮಾತು ಕಲಿತಿಲ್ಲ
        *
ಬಳೆಗಳ ಸದಿಲ್ಲದೇ
ಇಲ್ಲಿ
ಏನೂ ಆಗುವುದಿಲ್ಲ
ಎರಡು ರೀತಿಯ ಹಸಿವಿನಲ್ಲೂ,
ಅವುಗಳ ಮಹತ್ವ ದೊಡ್ಡದು.
        *
        ಈ ಮೇಲಿನ ಹನಿಗವಿತೆಗಳನ್ನು ಹತ್ತನೇ ತರಗತಿಗೆ ವಿದ್ಯಾಭ್ಯಾಸವನ್ನು ಬಿಟ್ಟ ಯುವಕನೊಬ್ಬ ಬರೆದಿದ್ದಾನೆಂದರೆ ನಂಬಲೇಬೇಕು. ತುಮಕೂರು ಜಿಲ್ಲೆ, ಮಧುಗಿರಿ ತಾಲ್ಲೂಕಿನ ವೀರಾಪುರ ಗ್ರಾಮದ ರಘುನಂದನ್ ವಿ.ಆರ್. ಎಂಬ ಯುವಕ ನವೀನ್ ಮಧುಗಿರಿ ಎಂಬ ಕಾವ್ಯನಾಮದಲ್ಲಿ ತಮ್ಮ ಮೊದಲ ಕೃತಿ ನವಿಗವನ ಎಂಬ ಹನಿ - ಹನಿಗವನಸಂಕಲನದಲ್ಲಿ ಈ ಮೇಲಿನ ಹನಿಗವಿತೆಗಳ ಜೊತೆಗೆ ಮತ್ತಷ್ಟು ಪ್ರಬುದ್ಧ ಹನಿಗವಿತೆಗಳನ್ನು ಪ್ರಕಟಿಸಿರುವುದನ್ನು ಓದಿದರೆ ಈ ಯುವ ಕವಿಯ ಬಗ್ಗೆ ಅತೀವ ಹೆಮ್ಮೆಯಾಗುತ್ತದೆ. ಈಗಾಗಲೇ ತಮ್ಮ ಕಥೆ, ಕವಿತೆ, ಕಿರುಕಥೆ (ನ್ಯಾನೋ ಕಥೆ), ಶಿಶುಗೀತೆ ಮತ್ತು ಹಲವು ಲೇಖನಗಳನ್ನು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟಿಸುವುದರ ಮೂಲಕ ಭರವಸೆ ಮೂಡಿಸಿದ್ದಾರೆ ಯುವ ಸಾಹಿತಿ ನವೀನ್ ಮಧುಗಿರಿ. ಇವರ ಈ ಮೊದಲ ಕೃತಿ ಕನ್ನಡ ಪುಸ್ತಕ ಪ್ರಾಧಿಕಾರದ ೨೦೧೩ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿ ಪ್ರಕಟಣೆಯ ಪ್ರೋತ್ಸಾಹಧನದಿಂದ ಪ್ರಕಟನೆಗೊಂಡಿದೆ. ಈ ಪುಸ್ತಕವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಪ್ರೋತ್ಸಾಹಧನದಿಂದ ಪ್ರಕಟಿಸಲು ತಮ್ಮದೇ ನವಿ ಪುಸ್ತಕ ಎಂಬ ಪ್ರಕಾಶನವನ್ನೂ ನವೀನ್ ಆರಂಭಿಸಿದ್ದರೆ. ಈ ಸಂಕಲನಕ್ಕೆ ಕವಿಯೂ, ಚಿತ್ರಸಾಹಿತಿಯೂ ಆಗಿರುವ ಗುರುನಾಥ್ ಬೋರಗಿಯವರ ಸುಂದರ ಮುಖಪುಟವೂ ಇದ್ದು, ಜೊತೆಗೆ ಅಲ್ಲಲ್ಲಿ ಕವಿತೆಗಳಿಗೆ ಪೂರಕವಾಗಿರುವ ರೇಖಾಚಿತ್ರಗಳಿವೆ. ಮಧುಗಿರಿ ತಾಲ್ಲೂಕಿನವರೇ ಆದ ಹಿರಿಯ ಸಾಹಿತಿ ಮ.ಲ.ನ. ಮೂರ್ತಿಯವರ ಮುನ್ನುಡಿ ಈ ಸಂಕಲನಕ್ಕಿದೆ. ಸಗಣಿ, ಗಂಜಳ, ಗೊಬ್ಬರದ ನಡುವೆ ಬದುಕನ್ನು ಕಟ್ಟಿಕೊಳ್ಳುತ್ತಿರುವ ಅಪ್ಪಟ ಗ್ರಾಮೀಣ ಪ್ರತಿಭೆಯಾದ ಯುವ ಕವಿಯ ಸಂವೇದನೆ, ಕಾವ್ಯದ ತುಣುಕುಗಳಲ್ಲಿ ವ್ಯಕ್ತವಾಗಿದೆ ಎಂದು ಮ.ಲ.ನ. ಮೂರ್ತಿಯವರು ಗುರುತಿಸಿದ್ದಾರೆ. ತಮ್ಮನಿಗೇ ಪ್ರೀತಿಯಿಂದ ಸಂಕಲನದ ಅರ್ಪಣೆಯಾಗಿದೆ.

        ನೀವು ಹನಿಗವನವೆನ್ನಿ, ಹನಿಗವಿತೆಯನ್ನಿ, ಕಿರುಗವಿತೆಯನ್ನಿ, ಚುಟುಕವೆನ್ನಿ ಅಥವಾ ಮತ್ತಿನೇನೋ ಅನ್ನಿ ಅದನ್ನು ಕೆಲವರು ಪ್ರಾಸಕ್ಕಷ್ಟೇ ಬರೆದರೆ, ಕೆಲವರು ಗಂಭೀರವಾಗಿ ಸಾಮಾಜಿಕ ಕಳಕಳಿಯಿಂದ ಬರೆಯುತ್ತಾರೆ. ಪ್ರಾಸಕ್ಕಾಗಿ ಬರೆದದ್ದೂ ಆ ಕ್ಷಣಕ್ಕಷ್ಟೇ ಖುಷಿ ನೀಡಿದರೆ, ಗಂಭೀರವಾಗಿ ಬರೆದದ್ದು ಓದುಗನನ್ನು ಕಾಡುವ ಗುಣ ಹೊಂದಿರುತ್ತದೆ. ಸಾಮಾಜಿಕ ಕಳಕಳಿಯಿಂದ ಬರೆಯುವಲ್ಲಿ ನನಗೆ ದಿನಕರ ದೇಸಾಯಿ, ಜರಗನಹಳ್ಳಿ ಶಿವಶಂಕರ್, ವೈ‌ಎನ್ಕೆ, ಸಿ.ಪಿ.ಕೆ, ಡುಂಡಿರಾಜ್, ಡಾ|| ಕೆ.ಬಿ.ರಂಗಸ್ವಾಮಿ, ಇನ್ನೂ ಮುಂತಾದವರೂ ಬಹಳ ಪ್ರಮುಖವಾಗಿ ಕಾಣುತ್ತಾರೆ. ಇವರ ಸಾಲಿಗೆ ನವೀನ್ ಮಧುಗಿರಿಯೂ ಸೇರಬಲ್ಲರು ಎಂಬ ಭರವಸೆ ಮೂಡಿಸುವ ಅನೇಕ ಹನಿಗವಿತೆಗಳು ಸಂಕಲನದಲ್ಲಿವೆ. ಈತ ತನ್ನ ಮೊದಲ ಸಂಕಲನದಲ್ಲಿಯೇ ಪ್ರೌಢಿಮೆ ಮೆರೆದಿದ್ದಾನೆ. ಈ ಕಾರಣಕ್ಕಾಗಿಯೇ ಇತ್ತೀಚಿಗೆ ಪ್ರಕಟವಾಗಿರುವ ಹಲವು ಹನಿಗವಿತೆ ಸಂಕಲನಗಳಲ್ಲಿ ಈ ಕೃತಿ ಬಹಳ ಪ್ರಮುಖ ಸ್ಥಾನವನ್ನು ಪಡೆಯುತ್ತದೆ.

        ವಯೋಸಹಜ ಪ್ರೀತಿ, ಪ್ರೇಮ, ಕಾಮ ವಸ್ತುಗಳಾಗಿರುವ ಹನಿಗವಿತೆಗಳೂ ಇಲ್ಲಿವೆ. ಆದರೆ, ಅವು ಬೆರಳೆಣಿಕೆಯಷ್ಟೇ ಎನ್ನಬಹುದು. ಉದಾಹರಣೆಗೆ :

ಹುಡುಗಿಯರು ಒಮ್ಮೆ
ಹೆಜ್ಜೆಯಿರಿಸಿದರೆ
ಜನುಮ ಪೂರ್ತಿ ಅಳಿಸುವುದಿಲ್ಲ!
ಅದರಲ್ಲೂ,
ಹೃದಯದ ಮೇಲೆ!
        *
ಬೇಲಿಯಿರದ
ಬದುಕ ಬಯಸಿ
ಹೊರಟವನನ್ನು
ಪ್ರೇಯಸಿಯ ಬಾಹುಗಳು
ಬಂಧಿಸಿದವು!
        *
ಎಲ್ಲಕ್ಕಿಂತಲೂ
ಮೊದಲು
ಹುಟ್ಟಿದ್ದು ಕಾಮ
ಆನಂತರ ನಾವೆಲ್ಲರೂ
ಹುಟ್ಟಿದ್ದು
        *
ಇಬ್ಬರೂ ಕೂಡಿದಾಗ
ಕಳೆದದ್ದು
ದೇಹದ ಹಸಿವು
        *

        ಸಂಕಲನದ ಅಲ್ಲಲ್ಲಿ ಕರುಳ ಸಂಬಂಧಗಳನ್ನು ನೆನೆಯುವ ಹನಿಗವತೆಗಳಿವೆ.

ಅಪ್ಪನ ಕೈಗಳನ್ನೇ
ಗಮನಿಸಿದ ನಮಗೆ
ಅವನ
ಹಗುರಾದ ಜೇಬು
ಅರ್ಥವಾಗಲಿಲ್ಲ
        *
ಅವ್ವ
ತನ್ನ ಕಷ್ಟ, ಕಣ್ಣೀರುಗಳನ್ನೆಲ್ಲ
ಬಚ್ಚಿಟ್ಟು
ಬರಿ ನಗುವನ್ನಷ್ಟೇ
ನಮಗೆ ಉಣ ಬಡಿಸಿದಳು
        *
ಅಟ್ಟ ಸೇರಿದ
ಒನಕೆಯ ಮೇಲೆ
ಮಾಸದ
ಅಜ್ಜಿಯ ಕೈಬೆರಳ
ಗುರುತು
        *      

        ಸಂಕಲನದ ಕೆಲವು ಹನಿಗವಿತೆಗಳು ಇತಿಹಾಸ, ಬ್ರೇಕಿಂಗ್ ನ್ಯೂಸ್‌ಗಳ ಮೇಲೂ ಬೆಳಕು ಚೆಲ್ಲಿವೆ:

ಇತಿಹಾಸದ ತುಂಬಾ
ಸಾವಿನ ಶವಗಳ
ವಾಸನೆ
        *
ಚುಟುಕು ಸುದ್ದಿ
ಆಕ್ರಮಿಸಿದೇ
ಎಷ್ಟೊಂದು ಕಿವಿ!?
        *

        ನವೀನ್ ತಮ್ಮ ಸಂಕಲನವನ್ನು ಸ್ನೇಹ ಹಾಗೂ ಗೌರವದೊಂದಿಗೆ ನನಗೆ ಕಳುಹಿಸಿದ ಸಮಯದಲ್ಲಿಯೇ ಒಂದು ಶನಿವಾರದ ಸಂಜೆ ಓದಿದಾಗಲೇ, ಈ ಸಂಕಲನವನ್ನು ಸಹೃದಯ ಓದುಗರಿಗೆ ಪರಿಚಯಿಸಬೇಕೆಂದು ಮನದಲ್ಲಿ ಆಸೆ ಮೂಡಿತಾದರೂ ಕಾಲ ಕೂಡಿಬಂದಿರಲಿಲ್ಲ. ಕಾಲ ಕೂಡಿ ಬರುವ ಸಮಯಕ್ಕೆ ನವೀನ್ ಅದಾಗಲೇ ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾಗಿದ್ದರು. ಅವರದೇ ಒಂದು ಹನಿಗವನದ ಆಶಯದಂತೆ ಅವರೂ ಮತ್ತೆ ಅಪ್ಪನಾಗಿ ಜನಿಸಿದ್ದಾರೆ.

ಪುಟ್ಟ ಮಗುವಿನ
ಮೊದಲ ಅಳುವಿನ
ಜೊತೆಗೆ
ಕಾರಿಡಾರಿನಲ್ಲೊಬ್ಬ
ಅಪ್ಪನ ಜನನ

        ಈ ಸಂದರ್ಭದಲ್ಲಿ ನವೀನ್‌ರವರಿಗೆ ಶುಭಕೋರುತ್ತಾ, ಖ್ಯಾತ ಹನಿಗವಿ, ಹನಿಗವಿತೆಗಳ ಖಜಾನೆಯ ಒಡೆಯ ಡುಂಡಿರಾಜ್ ರೇ ಹಿಂದಿನ ಮತ್ತು ಇಂದಿನ ಕವಿಗಳನ್ನು ಕುರಿತು ಬರೆದಿರುವ

ಅವರು ಆಯುವ ಕವಿ
ಇವರು ಈಯುವ ಕವಿ

ಎಂಬ ಹನಿಗವಿತೆಯನ್ನು ನೆನೆಯುತ್ತಾ, ನವೀನ್ ಮಧುಗಿರಿ ಆಯುವ ಕವಿ ಎಂದು ಶ್ಲಾಘಿಸಬಹುದಾಗಿದೆ.

                                                                           -       ಗುಬ್ಬಚ್ಚಿ ಸತೀಶ್.








ಬುಧವಾರ, ಜುಲೈ 22, 2015

’ಮುಗುಳ್ನಗೆ’ ಯ ಎರಡನೇ ಮುದ್ರಣ

ಆತ್ಮೀಯರೇ, ’ನಿಮ್ಮೆಲ್ಲರ ಮಾನಸ’ ಕನ್ನಡ ಮಾಸಪತ್ರಿಕೆಯ ೧೦೦ ಸಂಚಿಕೆಗಳ ಸಂಭ್ರಮಕ್ಕೆ ಮತ್ತು 
ಪುಸ್ತಕಗಳ ಬಿಡುಗಡೆಗೆ ತಪ್ಪದೆ ಪ್ರೀತಿಯಿಂದ ಬನ್ನಿ... 
ಅಂದು ನನ್ನ ಕಾದಂಬರಿ ’ಮುಗುಳ್ನಗೆ’ ಯ ಎರಡನೇ ಮುದ್ರಣ ಕೂಡ ಬಿಡುಗಡೆಯಾಗುತ್ತಿದೆ... 
ನಿಮಗಿದೋ ಪ್ರೀತಿಯ ಆಹ್ವಾನ...

ತಪ್ಪದೆ ಬನ್ನಿ...
ಪ್ರೀತಿಯಿಂದ,
ಗುಬ್ಬಚ್ಚಿ ಸತೀಶ್.

ದುಡ್ಡು ಬಿತ್ತಿ, ದುಡ್ಡು ಬೆಳೆಯಬಹುದೇ…!?

ಕನ್ನಡದಲ್ಲಿ ಪ್ರಕಟವಾಗಿ ಅತ್ಯಂತ ಹೆಚ್ಚು ಮಾರಾಟವಾದ “ಮನಿ ಸೀಕ್ರೆಟ್ಸ್‌ ಹಾಗೂ ಸ್ಟಾಕ್‌ ಮಾರ್ಕೆಟ್‌ ಸೀಕ್ರೆಟ್ಸ್”‌ (ಅಮೇಜಾನಿನಲ್ಲಿ ಕೊಳ್ಳಲು ಲಿಂಕ್:‌ https://amzn....